ರಾಜ್ಯದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ: ಸಚಿವ ಬಿ.ಸಿ.ನಾಗೇಶ್
1 min read
ಮಡಿಕೇರಿ,ಜ.26-ರಾಜ್ಯದಲ್ಲಿ 250 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮೇಲ್ದರ್ಜೆಗೆ ಏರಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವರೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕೊಡಗು ಜಿಲ್ಲೆಯಲ್ಲಿ ಅಗತ್ಯ ಕ್ರಮವಹಿಸಲಾಗಿದ್ದು, ಇದುವರೆಗೆ 15 ವರ್ಷ ಮೇಲ್ಪಟ್ಟ 4,23,115 ಮಂದಿಯಲ್ಲಿ 4,27,225 ಮಂದಿಗೆ ಪ್ರಥಮ ಡೋಸ್ ಕೋವಿಡ್ ನಿರೋಧಕ ಲಸಿಕೆ ನೀಡಿ ಶೇ. 100 ಕ್ಕಿಂತ ಹೆಚ್ಚು ಸಾಧನೆ ಮಾಡಲಾಗಿದೆ. ಹಾಗೆಯೇ 3,82,883 ಮಂದಿ ಎರಡನೇ ಡೋಸ್ ಪಡೆದು ಶೇ.90 ಕ್ಕಿಂತ ಹೆಚ್ಚು ಮಂದಿ ಜ.13 ರವರೆಗೆ ಎರಡನೇ ಡೋಸ್ ಪಡೆದಿದ್ದಾರೆ. ಹಾಗೆಯೇ ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಕೊಡಗು ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಈಗ ಬೂಸ್ಟರ್ ಡೋಸ್ನ್ನು ಮುಂಚೂಣಿ ಕಾರ್ಯಕರ್ತರಿಗೆ ನೀಡಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ ಆಮ್ಲಜನಕ ಪೂರೈಕೆ ವ್ಯವಸ್ಥೆ ಇರುವ 680 ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. 50 ವೆಂಟಿಲೇಟರ್, 50 ಐಸಿಯು ಜಿಲ್ಲಾಸ್ಪತ್ರೆಯಲ್ಲಿದೆ. ಜಿಲ್ಲಾ ವೈದ್ಯಕೀಯ ಕಾಲೇಜಿನಲ್ಲಿ ಎರಡು ಆಮ್ಲಜನಕ ಘಟಕ ಸ್ಥಾಪಿಸಲಾಗಿದೆ.
ಅಮೃತ್ ನಿರ್ಮಲ ನಗರ ಯೋಜನೆಯಡಿ ಘನತ್ಯಾಜ್ಯ ನಿರ್ವಹಣೆಗಾಗಿ ಮಡಿಕೇರಿ ನಗರಸಭೆ ಮತ್ತು ವಿರಾಜಪೇಟೆ ಪಟ್ಟಣ ಪಂಚಾಯಿತಿಗಳಿಗೆ ತಲಾ 100 ಲಕ್ಷ ರೂ.ಗಳು ಮಂಜೂರಾಗಿದ್ದು, ಕ್ರಿಯಾಯೋಜನೆ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ನಾಗೇಶ್ ಹೇಳಿದರು.
ಕೊಡಗು ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ತೊಂದರೆಗೊಳಗಾದ ಸುಮಾರು 47,757 ರೈತರಿಗೆ ಅಂದಾಜು 64ಕೋಟಿ ರೂ. ಪರಿಹಾರವನ್ನು ನೀಡಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತರಾದ 300ಕ್ಕೂ ಹೆಚ್ಚು ಮಂದಿಯ ವಾರಸುದಾರರಿಗೆ ರೂ. 50 ಸಾವಿರ ಪರಿಹಾರವನ್ನು ನೀಡಲಾಗಿದೆ. 158 ಬಿಪಿಎಲ್ ಕುಟುಂಬದ ವಾರಸುದಾರರಿಗೆ ಹೆಚ್ಚುವರಿ ರೂಪಾಯಿ 1ಲಕ್ಷ ರೂ. ಪರಿಹಾರ ವಿತರಿಸಲಾಗಿದೆ ಎಂದರು ಮಾಹಿತಿ ನೀಡಿದರು.