ದೂರುದಾರನಿಗೆ ತನ್ನ ಕಾರನ್ನೇ ಕೊಟ್ಟ ತುಮಕೂರು ಎಸ್ಪಿ!
1 min read
ತುರುವೇಕೆರೆ,ಜ.15-ದೂರುದಾರನಿಗೆ ತುಮಕೂರು ಎಸ್ಪಿ ತನ್ನ ಕಾರನ್ನೇ ನೀಡಿರುವ ಘಟನೆ ನಡೆದಿದೆ.
ಠಾಣೆ ಮುಂದೆ ಎಸ್ಪಿ ಕಾರು ಬರುತ್ತಿದ್ದಂತೆ ಪಿಎಸ್ಐ ಗಢಗಢ ಎಂದು ನಡುಗಿ ಹೋಗಿದ್ದಾನೆ.
ದೂರು ದಾಖಲಾಗಿದ್ದರೂ ದಂಡಿನಶಿವರ ಠಾಣೆಯ ಪಿಎಸ್ಐ ಮಾತ್ರ ಆರೋಪಿಯನ್ನು ಬಂಧಿಸಿರಲಿಲ್ಲ. ದೂರುದಾರರು ನಿತ್ಯ ಠಾಣೆಗೆ ಅಲೆದು ಅಲೆದು ಸಾಕಾಗಿತ್ತು. ಆರೋಪಿಯನ್ನು ಬಂಧಿಸಿ ಎಂದರೆ ‘ಆರೋಪಿಯನ್ನು ಕರೆತರಲು ಬಾಡಿಗೆ ಕಾರು ತನ್ನಿ’ ಎಂದು ಸೂಚಿಸಿದ್ದರು.
ಈ ರೀತಿ ಸೂಚಿಸಿದ್ದ ದಂಡಿನಶಿವರ ಠಾಣೆ ಪಿಎಸ್ಐ ಶಿವಲಿಂಗಯ್ಯಗೆ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ರಾಹುಲ್ಕುಮಾರ್ ನೀಡಿರುವ ಆರೋಪಿಯನ್ನು ತಮ್ಮ ಕಾರನಲ್ಲಿ ಠಾಣೆಗೆ ಕಳುಹಿಸಿ ಶಾಕ್ ಕೊಟ್ಟಿದ್ದಾರೆ.
ಘಟನೆ ವಿವರ: 2021ರ ಆಗಸ್ಟ್ 28ರಂದು ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ದಂಡಿನಶಿವರ ಠಾಣಾ ವ್ಯಾಪ್ತಿಯ ಕೋಡಿಹಳ್ಳಿಯಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಾಗೇಂದ್ರಪ್ಪ ಹಾಗೂ ಪಕ್ಕದ ಮನೆಯ ಶಿವಪ್ರಕಾಶ್ ಮತ್ತು ಪ್ರಕಾಶ್ ರ ಮಗ ಚಂದನ್ ನಡುವೆ ಜಗಳವಾಗಿತ್ತು. ಆ ವೇಳೆ ನಾಗೇಂದ್ರಪ್ಪ ಹಾಗೂ ಪತ್ನಿ ಶಿವಮ್ಮಗೆ ಚಂದನ ಮತ್ತು ಶಿವಪ್ರಕಾಶ್ ಹಿಗ್ಗಾಮುಗ್ಗಾ ಹಲ್ಲೆಗೈದಿದ್ದರಂತೆ. ನಾಗೇಂದ್ರಪ್ಪ ಮತ್ತು ಶಿವಮ್ಮಗೆ ಗಂಭೀರ ಗಾಯಗಳಾಗಿ ತುರುವೇಕೆರೆ ಆಸ್ಪತ್ರೆ ಹಾಗೂ ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ವೈದ್ಯರು ಇದು ಮಾರಣಾಂತಿಕ ಹಲ್ಲೆ ಅಂತಾ ವರದಿ ನೀಡಿದ್ದಾರೆ. ಇದನ್ನ ಪಡೆದ ನಾಗೇಂದ್ರಪ್ಪ ದಂಡಿನಶಿವರ ಪೊಲೀಸ್ ಠಾಣೆಗೆ 307 ಕೊಲೆ ಪ್ರಯತ್ನ ಕೇಸ್ ನೀಡಿದ್ದರು.
ಆರೋಪಿಗಳನ್ನು ಬಂಧಿಸದೆ ಪಿಎಸ್ಐ ನಿರ್ಲಕ್ಷ್ಯ ವಹಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಪ್ರಕಾಶ್ಗೆ ಜಾಮೀನು ದೊರೆತಿದ್ದು, ಚಂದನ್ ತಲೆಮರೆಸಿಕೊಂಡಿದ್ದ. ಹೀಗಾಗಿ ಆರೋಪಿ ಚಂದನ್ನನ್ನು ಬಂಧಿಸುವಂತೆ ದೂರುದಾರ ನಾಗೇಂದ್ರಪ್ಪ ಠಾಣೆಗೆ ಬಂದು ಪಿಎಸ್ಐ ಬಳಿ ಮನವಿ ಮಾಡಿಕೊಂಡಾಗ, ಆರೋಪಿಯನ್ನು ಬಂಧಿಸೋಣ. ಅದಕ್ಕಾಗಿ ನೀನೊಂದು ಬಾಡಿಗೆ ವಾಹನ ಮಾಡಿಕೊಂಡು ಬಾ ಎಂದು ಪಿಎಸ್ಐ ಶಿವಲಿಂಗಯ್ಯ ಹೇಳಿದ್ದರು ಎನ್ನಲಾಗಿದೆ.
ತನಿಖೆಗೆ ಆಗ್ರಹಿಸಿ ಪದೇ ಪದೇ ಠಾಣೆಗೆ ಭೇಟಿ ನೀಡುತ್ತಿದ್ದ ನಾಗೇಂದ್ರಪ್ಪ ಪಿಎಸ್ಐ ವರ್ತನೆಗೆ ರೋಸಿಹೋಗಿ ಗುರುವಾರ ತುಮಕೂರಿಗೆ ಬಂದು ಜಿಲ್ಲಾ ಪೊಲೀಸ್ ಅಧೀಕ್ಷಕ ರಾಹುಲ್ಕುಮಾರ್ ಅವರನ್ನು ಭೇಟಿಯಾಗಿ ಕಣ್ಣೀರಿಟ್ಟಿದ್ದರು. ಪಿಎಸ್ಐ ವರ್ತನೆಗೆ ಕೆಂಡಾಮಂಡಲರಾದ ಎಸ್ಪಿ, ಸ್ವತಃ ತಮ್ಮ ಕಾರಿನಲ್ಲೇ ನಾಗೇಂದ್ರಪ್ಪ ಮತ್ತು ಅವರ ಕಡೆಯವರನ್ನ ಕುಳಿತುಕೊಳ್ಳುವಂತೆ ಹೇಳಿ, ತಮ್ಮ ಕಾರು ಚಾಲಕನಿಗೆ ಕರೆದು ಇವರನ್ನು ಸೀದಾ ದಂಡಿನಶಿವರ ಪೊಲೀಸ್ ಠಾಣೆಗೆ ಬಿಟ್ಟು ಬಾ ಎಂದಿದ್ದಾರೆ. ಕಾರು ಬಂದಿದೆ ಆರೋಪಿಯನ್ನು ಬಂಧಿಸುವಂತೆ ಪಿಎಸ್ಐ ಅವರನ್ನ ಕೇಳಿ ಎಂದು ನಾಗೇಂದ್ರಪ್ಪಗೆ ಹೇಳಿ ಕಳುಹಿಸಿದ್ದಾರೆ.
ಪೊಲೀಸ್ ಠಾಣೆ ಮುಂದೆ ಸಾಹೇಬರ ಕಾರು ಕಂಡೊಡನೆ ದಂಗಾದ ದಂಡಿನಶಿವರ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿ ನಿಂತಲ್ಲಿಯೇ ಬೆವತ್ತು ಹೋಗಿದ್ದಾರೆ. ಅಷ್ಟೇ ಅಲ್ಲ, ದಂಡಿನಶಿವರ ಪಿಎಸ್ಐ ಶಿವಲಿಂಗಯ್ಯಗೆ ದೂರವಾಣಿ ಕರೆ ಮಾಡಿದ ಎಸ್ಪಿ ರಾಹುಲ್, ಆರೋಪಿ ಎಲ್ಲೇ ಇದ್ದರೂ ನಾಳೆ ಬೆಳಗಾಗುವಷ್ಟರಲ್ಲಿ ಬಂಧಿಸಬೇಕು ಎಂದು ಖಡಕ್ ವಾರ್ನಿಂಗ್ ಮಾಡಿದ್ದಾರೆ.