ಅಂಜನಾದ್ರಿ ಬೆಟ್ಟ ಹನುಮನ ಜನ್ಮಸ್ಥಳ: ನಂಬಿಕೆಗಿಂತ ಬೇರೆ ಪುರಾವೆ ಬೇಕಿಲ್ಲ: CM ಬೊಮ್ಮಾಯಿ
ಕೊಪ್ಪಳ: ಆಂಜನೇಯ ಹುಟ್ಟಿದ್ದು ಅಂಜನಾದ್ರಿ ಬೆಟ್ಟದಲ್ಲಿ ಎನ್ನುವುದಕ್ಕೆ ಐತಿಹಾಸಿಕವಾಗಿ ಸಾವಿರಾರು ವರ್ಷಗಳಿಂದ ಇದು ಕಿಷ್ಕಿಂದೆಯಾಗಿತ್ತು ಎನ್ನುವ ನಂಬಿಕೆಗಿಂತ ಇನ್ನೊಂದು ಪುರಾವೆ ಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಗಂಗಾವತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ಆಂಜನೇಯನ ಹುಟ್ಟಿನ ಬಗ್ಗೆ ವಿವಾದಾತ್ಮಕ ಹೇಳಿಕೆಗಳಿವೆ. ಮೂಲತ: ಆಂಜನೇಯ ಹುಟ್ಟಿದ್ದು, ಅಂಜನಾದ್ರಿ ಬೆಟ್ಟದಲ್ಲಿಯೇ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಈ ಬಗ್ಗೆ ಚರ್ಚೆ ಅವಶ್ಯಕತೆ ಇಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ಅಂಜನಾದ್ರಿ ಬೆಟ್ಟವನ್ನು ಸ್ಥಳವನ್ನು ಅಭಿವೃದ್ಧಿ ಪಡಿಸಲು ತೀರ್ಮಾನಿಸಿದ್ದೇವೆ. ಈ ಕುರಿತು ಕರ್ನಾಟಕ, ಆಂಧ್ರಪ್ರದೇಶ ಬೇರೆ ಬೇರೆಯಾಗಿ ಘೋಷಣೆ ಮಾಡಬೇಕಿಲ್ಲ. ಇಡೀ ಭಾರತವಾಸಿಗಳು ಈ ವಿಷಯವನ್ನು ನಂಬಿದ್ದಾರೆ ಹಾಗೂ ಎಲ್ಲರಿಗೂ ವಿಶ್ವಾಸವಿದೆ ಎಂದರು.

ಆರಾಧ್ಯ ದೈವ ಆಂಜನೇಯ ಸ್ವಾಮಿಯ ಜನ್ಮಸ್ಥಳದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಬಜೆಟ್ನಲ್ಲಿ ಮಾಡಿದ್ದ ಘೋಷಣೆ ಮಾಡಲಾಗಿತ್ತು. ಪ್ರತಿ ವರ್ಷ ಬಹಳಷ್ಟು ಯಾತ್ರಿಕರು ಆಗಮಿಸುತ್ತಾರೆ. ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆಯಾಗಬೇಕು ಎಂಬ ಉದ್ದೇಶವಿದೆ. ಅಂಜನಾದ್ರಿ ಬೆಟ್ಟದ ಕೆಳಗೆ ಹಾಗೂ ಮೇಲೆಯೂ ಅಭಿವೃದ್ಧಿಯಾಗಬೇಕು ಎನ್ನುವ ಚಿಂತನೆಯಿಂದ 100 ಕೋಟಿ ರೂ.ಗಳ ಅನುದಾನವನ್ನು ಒದಗಿಸಿದೆ. ಆ ಪ್ರಕಾರ ಸರ್ಕಾರಿ ಆದೇಶವನ್ನೂ ಹೊರಡಿಸಲಾಗಿದೆ. ಯಾತ್ರಿಕರಿಗೆ ವಸತಿ, ಮಾರುಕಟ್ಟೆ , ಆಸ್ಪತ್ರೆ ಮುಂತಾದ ಎಲ್ಲ ರೀತಿಯ ಸವಲತ್ತುಗಳು ದೊರಕಬೇಕು ಮಾತ್ತು ರೋಪ್ ವೇ ನಿರ್ಮಿಸಿ ವಯಸ್ಸಾದವರಿಗೆ ಅವಕಾಶವನ್ನು ಕಲ್ಪಿಸುವುದು ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಇದನ್ನು ಬೆಳೆಸಬೇಕು ಎನ್ನುವ ಪರಿಕಲ್ಪನೆಯಿಂದ ಸ್ಥಳ ವೀಕ್ಷಣೆ ಮಾಡಲಾಗುತ್ತಿದೆ ಎಂದರು.
ಪ್ರವಾಸೋದ್ಯಮ ಸರ್ಕಿಟ್:
ರೋಪ್ ವೇಗೆ ಟೆಂಡರ್ ಕರೆಯಲು ಸೂಚಿಸಲಾಗಿದೆ. ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಅಂಜನಾದ್ರಿ ಬೆಟ್ಟದ ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳ ಅಭಿವೃದ್ಧಿಯಾಗಬೇಕು. ಕರ್ನಾಟಕದಲ್ಲಿ ಮೈಸೂರು ಮತ್ತು ಹಂಪಿ ಅಂತರರಾಷ್ಟ್ರೀಯ ಪ್ರವಾಸೋದ್ಯಮ ಸರ್ಕಿಟ್ ರೂಪಿಸಲು ಆದೇಶ ಹೊರಡಿಸಿದೆ. ಪುರಾತತ್ವ ಇಲಾಖೆಗೆ ಒಳಪಡುವ ಸ್ಥಳಗಳನ್ನು ಹೊರತುಪಡಿಸಿ ಹಂಪಿಯ ಸುತ್ತಮುತ್ತಲ ಪ್ರದೇಶಗಳು ಹಾಗೂ ಊರುಗಳ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳಲು ಸೂಚಿಸಿದೆ. ಐತಿಹಾಸಿಕ ಪ್ರವಾಸೋದ್ಯಮಕ್ಕೆ ಪುಷ್ಟಿ ನೀಡಲು ಬಜೆಟ್ನಲ್ಲಿ ಅನುದಾನ ನೀಡಲಾಗಿದೆ. ಈಗ ಕಾರ್ಯಕ್ರಮ ಪ್ರಾರಂಭಲಾಗುವುದು ಎಂದರು.
ಭೂಸ್ವಾಧೀನಕ್ಕಾಗಿ 24 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದು ಅತಿಶೀಘ್ರದಲ್ಲಿಯೇ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದರು.