ಎಸ್.ಎಂ.ಕೃಷ್ಣರಿಂದ ದಸರಾ ಉದ್ಘಾಟನೆ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅಭಿನಂದನೆ
ಬೆಂಗಳೂರು/ಮೈಸೂರು, ಸೆ.28- ಇಡೀ ವಿಶ್ವವನ್ನೇ ಬೆಂಗಳೂರಿನತ್ತ ತಿರುಗಿ ನೋಡುವಂತೆ ಮಾಡಿದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರನ್ನು ನಾಡಹಬ್ಬ ದಸರಾ ಮಹೋತ್ಸವ ಉದ್ಘಾಟನೆಗೆ ಆಯ್ಕೆ ಮಾಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿರ್ಧಾರ ಸ್ವಾಗತಾರ್ಹ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.
ದಸರಾ ಉದ್ಘಾಟಕರಾಗಿ ಆಯ್ಕೆಯಾಗಿರುವ ಹಿರಿಯ ಮುತ್ಸುದ್ಧಿ ಎಸ್. ಎಂ.ಕೃಷ್ಣ ಅವರಿಗೆ ಸೋಮಶೇಖರ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ರಾಜ್ಯದ ಅಭಿವೃದ್ಧಿ ವಿಷಯದಲ್ಲಿ ದೂರದೃಷ್ಟಿ ಹೊಂದಿ, ಬೆಂಗಳೂರಿನ ಚಿತ್ರಣವನ್ನೇ ಬದಲಿಸಿ, ಸಿಲಿಕಾನ್ ಸಿಟಿ, ಸಿಲಿಕಾನ್ ವ್ಯಾಲಿ ಎಂದು ಹೆಸರು ತಂದುಕೊಟ್ಟು ರಾಜ್ಯ ರಾಜಧಾನಿಯನ್ನು ಐಟಿ ಹಬ್ ಮಾಡಿದ ಎಸ್.ಎಂ.ಕೃಷ್ಣ ಅವರಿಂದ ಈ ಬಾರಿ ದಸರಾ ಉದ್ಘಾಟನೆ ಆಗುತ್ತಿರುವುದು ನಿಜಕ್ಕೂ ಸಂತಸದ ವಿಚಾರ ಎಂದು ಸಚಿವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಕಂಪನಿಗಳು ಹೂಡಿಕೆ ಮಾಡಲು ಕಾರಣಕರ್ತರಾದ, ಟೌನ್ ಶಿಪ್ ಗಳ ನಿರ್ಮಾಣದ ಜೊತೆಗೆ ಐಟಿ ಕ್ರಾಂತಿ ಮಾಡಿದ ಎಸ್.ಎಂ.ಕೃಷ್ಣ ಅವರ ಬಗ್ಗೆ ಎಷ್ಟು ಹೇಳಿದರು ಸಾಲದು. ದೂರದೃಷ್ಟಿಯುಳ್ಳ ವ್ಯಕ್ತಿಯನ್ನು ಆಯ್ಕೆ ಮಾಡಿದ ಮಾನ್ಯ ಮುಖ್ಯಮಂತ್ರಿ ಅವರ ನಿರ್ಧಾರ ಕೂಡ ಅಭಿನಂದನಾರ್ಹ ಎಂದು ತಿಳಿಸಿದ್ದಾರೆ.