ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಿ: ಡಿ.ಕೆ.ಶಿವಕುಮಾರ್ ಆಗ್ರಹ

1 min read

ಬೆಂಗಳೂರು,ಫೆ.18-ಕೆ.ಎಸ್.ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂಬುದು ನಮ್ಮ ಆಗ್ರಹ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.


ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಈಶ್ವರಪ್ಪ ಅವರಿಂದ ರಾಜೀನಾಮೆ ಪಡೆಯಿರಿ ಎಂದು ಸರ್ಕಾರಕ್ಕೆ ಕೇಳುತ್ತಿಲ್ಲ. ಬದಲಿಗೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಕೇಳುತ್ತಿದ್ದೇವೆ ಎಂದರು.


ವಿಧಾನಸೌಧದಲ್ಲಿ ಅಹೋರಾತ್ರಿ ನಡೆಸಿದ ಧರಣಿ ನಮ್ಮ ಹಾಗೂ ಬಿಜೆಪಿ ನಡುವಣ ವೈಯಕ್ತಿಕ ಹೋರಾಟ ಅಲ್ಲ ಎಂದ ಅವರು, ಇದು ಕೇವಲ ಈಶ್ವರಪ್ಪನ ವಿಚಾರ ಅಲ್ಲ. ರಾಷ್ಟ್ರಧ್ವಜ ಗೌರವದ ಪ್ರಶ್ನೆ ಎಂದು ಹೇಳಿದರು.


ಈಶ್ವರಪ್ಪ ಅವರು ನನ್ನ ತಂದೆಯನ್ನು ಎಳೆದು ತಂದಿದ್ದಾರೆ. ಅದು ವೈಯಕ್ತಿಕ ವಿಚಾರವಾದರೂ ನಾನು ಆ ಬಗ್ಗೆ ಮಾತನಾಡುತ್ತಿಲ್ಲ. ಇದು ದೇಶದ ಸ್ವಾತಂತ್ರ್ಯ, ಸಂವಿಧಾನ, ರಾಷ್ಟ್ರಧ್ವಜಕ್ಕೆ ಸಂಬಂಧಿಸಿದ ವಿಚಾರ. ಇದಕ್ಕಾಗಿ ನಮ್ಮ, ನಿಮ್ಮ ಪೂರ್ವಜರು ಮಾಡಿರುವ ತ್ಯಾಗ ಬಲಿದಾನ ಅಪಾರವಾಗಿದೆ. ಇದು ದೇಶದ ಗೌರವ ಹಾಗೂ 135 ಕೋಟಿ ಭಾರತೀಯರ ಸ್ವಾಭಿಮಾನದ ಪ್ರಶ್ನೆ ಎಂದರು.
ರಾಷ್ಟ್ರಧ್ವಜ ಹಾರುವಾಗ ನಮ್ಮೆಲ್ಲರ ಮೈ ರೋಮಾಂಚನವಾಗುತ್ತದೆ. ಅಂತಹ ಧ್ವಜ ತೆಗೆದುಹಾಕಿ, ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಹೇಳಿದರೆ ನೋಡಿಕೊಂಡು, ಕೇಳಿಕೊಂಡು ಸುಮ್ಮನೆ ಕೂರಲು ಸಾಧ್ಯವೇ? ಎಂದು ಪ್ರಶ್ನಿಸಿದರು.


ಈ ದೇಶಕ್ಕೆ ರಾಷ್ಟ್ರಧ್ವಜ, ಸ್ವಾತಂತ್ರ್ಯ ತಂದುಕೊಟ್ಟವರು ಕಾಂಗ್ರೆಸಿಗರು. ಹೀಗಾಗಿ ನಾವು ಈ ವಿಚಾರವಾಗಿ ಸುಮ್ಮನೆ ಕೂರಲು ಸಾಧ್ಯವಿಲ್ಲ‌ ಎಂದು ಕಿಡಿಕಾರಿದರು.


ಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವಾಗ ಏನೆಂದು ಪ್ರಮಾಣ ಮಾಡಿದ್ದರು? ಸಂವಿಧಾನ ಕಾಪಾಡುತ್ತೇನೆ. ದೇಶದ ಗೌರವ ಕಾಪಾಡುತ್ತೇನೆ ಎಂದಿದ್ದಾರೆ. ಹೀಗಾಗಿ ಮುಖ್ಯಮಂತ್ರಿಗಳು ಹಾಗೂ ರಾಜ್ಯಪಾಲರು ಈಗ ಆ ಕೆಲಸ ಮಾಡಬೇಕಲ್ಲವೇ? ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಸಮರ್ಥನೆಗೆ ಮುಂದಾದರೆ ಅವರೂ ಕೂಡ ಇದಕ್ಕೆ ಹೊಣೆಯಾಗುತ್ತಾರೆ. ಅಲ್ಲದೆ ತಮ್ಮ ಸ್ಥಾನಕ್ಕೆ ಅಗೌರವ ತರುತ್ತಿದ್ದಾರೆ
ಎಂದು ಹೇಳಿದರು.


ನೆರೆ, ರೈತರಿಗೆ ಸಮಸ್ಯೆ ಆದಾಗ ಕಾಂಗ್ರೆಸ್ ಅಹೋರಾತ್ರಿ ಧರಣಿ ಮಾಡಲಿಲ್ಲ. ಆದರೆ ಬೇರೆ ವಿಚಾರವಾಗಿ ಧರಣಿ ಮಾಡುತ್ತಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ನಾವು ಮಾಡಲಿಲ್ಲ ಎಂದಾದರೆ ಅವರು ಬಂದು ಮಾಡಲಿ. ಇಷ್ಟು ದಿನ ಯಾವ ಸುದ್ದಿಯನ್ನೂ ಎತ್ತದ ಅವರು ಈಗ ಬಂದು ಸರ್ಕಾರದ ವೈಫಲ್ಯಗಳ ಬಗ್ಗೆ ಹೋರಾಟ ಮಾಡಲಿ. ನಾವು ಬೆಳಗಾವಿ ಅಧಿವೇಶನದಲ್ಲಿ ಹೋರಾಟ ಮಾಡಿಲ್ಲವೇ? ಅವರದ್ದು ರಾಜಕೀಯ ಪಕ್ಷವಾಗಿದ್ದು, ಅವರ ಸಿದ್ಧಾಂತದ ಆಧಾರದ ಮೇಲೆ ಬಂದು ಹೋರಾಟ ಮಾಡಲಿ, ಬೇಡ ಎಂದವರು ಯಾರು?’ ಎಂದು ಹೇಳಿದರು.


ಸದನದ ಸಮಯ ಹಾಳಾಗುತ್ತಿದೆ ಎಂಬ ಕುಮಾರಸ್ವಾಮಿ ಹೇಳಿಕೆಗೆ, ‘ಕುಮಾರಸ್ವಾಮಿ ಅವರು ಸದನಕ್ಕೆ ಬಂದು ದೇವರು ಕೂತಂತೆ ಕೂತು ರೈತರು ಸೇರಿದಂತೆ ಅವರಿಗೆ ಬೇಕಾದ ವಿಚಾರಗಳ ಬಗ್ಗೆ ಮಾತನಾಡಲಿ. ಟ್ರೈಲರ್ ತೋರಿಸುತ್ತೇವೆ ಎಂದು ಹೇಳಿದ್ದಾರೆ, ಅದನ್ನೂ ನೋಡೋಣ’ ಎಂದು ತಿರುಗೇಟು ನೀಡಿದರು.

About Author

Leave a Reply

Your email address will not be published. Required fields are marked *