ಗ್ರೇಟರ್ ಮೈಸೂರು ಆಗಬೇಕು: ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ ಧಕ್ಕೆ ಆಗಬಾರದು: ಸಿ.ಎಂ.ಸಿದ್ದರಾಮಯ್ಯ
ಮೈಸೂರು ನವೆಂಬರ್ 03: ಗ್ರೇಟರ್ ಮೈಸೂರು ಆಗಬೇಕು. ಆದರೆ ಈಗಿನ ಮೈಸೂರಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.
ಇಂದು ಮೈಸೂರು ಮಹಾನಗರ ಪಾಲಿಕೆಯ ವಲಯ ಕಚೇರಿ 3 ರಲ್ಲಿ ನಡೆದ ಮೊದಲ “ಗ್ರೇಟರ್ ಮೈಸೂರು” ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ತಮ್ಮ ಸ್ಪಷ್ಟ ಪರಿಕಲ್ಪನೆಗಳನ್ನು ವಿವರಿಸಿ ಸೂಚನೆಗಳನ್ನು ನೀಡಿದರು.

ಬೆಂಗಳೂರಿನ ರೀತಿ ಟ್ರಾಫಿಕ್ ಸಮಸ್ಯೆ, ಒಳಚರಂಡಿ, ಫುಟ್ ಪಾತ್, ಕುಡಿಯುವ ನೀರು, STP ಯಾವುದರ ಸಮಸ್ಯೆಯೂ ಇರದಂತೆ ಸ್ಪಷ್ಟ ವೈಜ್ಞಾನಿಕ ಬ್ಲೂ ಪ್ರಿಂಟ್ ಸಿದ್ದಪಡಿಸಿ ಎಂದು ಜಿಲ್ಲಾಡಳಿತಕ್ಕೆ ಸಿ.ಎಂ ಸೂಚನೆ ನೀಡಿದರು. ಗ್ರೇಟರ್ ಮೈಸೂರು ಸುಸಜ್ಜಿತವಾಗಿರಬೇಕು ಮತ್ತು ವ್ಯವಸ್ಥಿತವಾಗಿರಬೇಕು.ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಹೀಗೆ ಒದಗಿಸುವಾಗ ಈಗಿನ ಜನಸಂಖ್ಯೆಗೆ ಮಾತ್ರ ಯೋಜನೆ ರೂಪಿಸದೆ ಮುಂದಿನ 15-20 ವರ್ಷಗಳ ಮುಂದಾಲೋಚನೆಯಿಂದ ವೈಜ್ಞಾನಿಕ ಯೋಜನೆ ರೂಪಿಸಿ ಎಂದು ಸೂಚಿಸಿದರು.
ಟ್ರಾಫಿಕ್ ಸಮಸ್ಯೆ ಯಾವುದೇ ಕಾರಣಕ್ಕೂ ಇರಬಾರದು. ಉದ್ಯೋಗ ಸೃಷ್ಟಿಯಿಂದ ಘನ ತ್ಯಾಜ್ಯ ನಿರ್ವಹಣೆವರೆಗೂ ಆಧುನಿಕ ತಂತ್ರಜ್ಞಾನ ಬಳಕೆ ಬಗ್ಗೆ ಯೋಜನೆ ಸಿದ್ಧಪಡಿಸಿ. ತ್ಯಾಜ್ಯ ವಿಲೇವಾರಿ, ಕೈಗಾರಿಕಾ ತ್ಯಾಜ್ಯ ವಿಲೇವಾರಿ ಎಲ್ಲವೂ ವೈಜ್ಞಾನಿಕವಾಗಿರಬೇಕು. ಆಧುನಿಕ ತಂತ್ರಜ್ಞಾನದ ನೆರವು ಪಡೆಯಬೇಕು ಎಂದರು.

ಬಡಾವಣೆಗಳ ನಿರ್ಮಾಣದಲ್ಲಿ ಆಗುವಾಗ ಚರಂಡಿ, ರಸ್ಯೆಗಳು, ಒಳಚರಂಡಿ, ನೀರು, ವಿದ್ಯುತ್ ಜೊತೆಗೆ ಪಾರ್ಕ್ ಗಳು ವ್ಯವಸ್ಥಿತವಾಗಿರಬೇಕು. ಮೈಸೂರಿಗೆ ಮತ್ತೊಂದು ಹೊರ ವರ್ತುಲ ರಸ್ತೆ ಅಗತ್ಯ ಬೀಳುತ್ತದೆ. ಇದಕ್ಕೆ ಈಗಲೇ ಯೋಜನೆ ಮಾಡಿಕೊಳ್ಳಿ ಎಂದರು.
ಆದಾಯವೂ ಹೆಚ್ಚಾಗಬೇಕು. ಇದಕ್ಕೆ ಸ್ಪಷ್ಟ ಅಂದಾಜು, ಯೋಜನೆ ರೂಪಿಸಿಕೊಳ್ಳಿ. ವಿಶಾಲವಾದ ರಸ್ತೆಗಳು ಮೈಸೂರಿನ ಹೆಗ್ಗಳಿಕೆ, ಗ್ರೇಟರ್ ಮೈಸೂರು ಇನ್ನಷ್ಟು ಯೋಜನಾಬದ್ಧವಾಗಿರಬೇಕು.ಜನಸಂಖ್ಯೆಗೆ ಅನುಗುಣವಾಗಿ ಪೌರ ಕಾರ್ಮಿಕರ ಸಂಖ್ಯೆ ಹೆಚ್ಚಾಗಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್ ಸಿ ಮಹದೇವಪ್ಪ, ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಶಾಸಕರಾದ ಕೆ ಹರೀಶ್ ಗೌಡ, ಜಿ ಟಿ ದೇವೇಗೌಡ, ತನ್ವೀರ್ ಸೇಠ್, ವಿಧಾನ ಸದಸ್ಯರಾದ ವಿಶ್ವನಾಥ್, ಸಿ ಎನ್ ಮಂಜೇಗೌಡ, ಯತೀಂದ್ರ ಸಿದ್ದರಾಮಯ್ಯ, ಕೆ ಶಿವಕುಮಾರ್, ತಿಮ್ಮಯ್ಯ, ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಕ್ ತನ್ವೀರ್ ಆಸಿಫ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.