ಹಿಜಾಬ್-ಕೇಸರಿ ಶಾಲು ವಿವಾದ: ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆನ್ ಲೈನ್ ತರಗತಿ ಪ್ರಾರಂಭಿಸಲು ಸಿದ್ದರಾಮಯ್ಯ ಆಗ್ರಹ
1 min read
ಬೆಂಗಳೂರು,ಫೆ.8-ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಿಜಾಬ್-ಕೇಸರಿ ಶಾಲು ಸಂಘರ್ಷ ನಡೆಯುತ್ತಿರುವ ಶಾಲಾ ಕಾಲೇಜುಗಳಿಗೆ ತಕ್ಷಣ ರಜೆ ಘೋಷಿಸಿ ಆನ್ ಲೈನ್ ತರಗತಿಗಳನ್ನು ಪ್ರಾರಂಭಿಸಬೇಕೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಜಾಬ್-ಕೇಸರಿ ಶಾಲು ನಡುವಿನ ಸಂಘರ್ಷ ಅತಿರೇಕಕ್ಕೆ ತಲುಪಿ ವಿದ್ಯಾರ್ಥಿಗಳು ಪರಸ್ಪರ ಕಾದಾಟಕ್ಕೆ ಇಳಿದು ಶಾಲಾ-ಕಾಲೇಜುಗಳಳೇ ಕದನಕಣಗಳಾಗುತ್ತಿರುವುದು ಅಪಾಯಕಾರಿ ಬೆಳವಣಿಗೆ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಆನ್ ಲೈನ್ ತರಗತಿ ಶುರು ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.
ಪ್ರಾರಂಭದ ಹಂತದಲ್ಲಿಯೇ ಸ್ಥಳೀಯವಾಗಿ ಸೌಹಾರ್ದಯುತವಾಗಿ ಬಗೆಹರಿಸಬಹುದಾಗಿದ್ದ ಸರಳ ಸಮಸ್ಯೆಯನ್ನು ರಾಜಕೀಯ ಕಾರಣಕ್ಕಾಗಿ ಉಲ್ಭಣಗೊಳಿಸಿರುವ ರಾಜ್ಯಸರ್ಕಾರ ಈಗ ನಿಯಂತ್ರಿಸಲಾಗದೆ ಕೈಚೆಲ್ಲಿ ಕೂತಿದೆ ಎಂದು ಕಿಡಿಕಾರಿದರು.
ಸಮಸ್ಯೆಯನ್ನು ಇತ್ಯರ್ಥಗೊಳಿಸುವ ಹೊಣೆಗಾರಿಕೆ ಹೊಂದಿರುವ ರಾಜ್ಯ ಶಿಕ್ಷಣ ಸಚಿವರು ಮತ್ತು ಗೃಹಸಚಿವರು ನೀಡುತ್ತಿರುವ ಪ್ರಚೋದನಾಕಾರಿ ಹೇಳಿಕೆ ಪರಿಸ್ಥಿತಿ ಬಿಗಡಾಯಿಸಲು ಕಾರಣವಾಗಿರುವುದು ವಿಷಾದನೀಯ.ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯ ಗಂಭೀರತೆಯನ್ನು ಮುಖ್ಯಮಂತ್ರಿಗಳು ತಕ್ಷಣ ಮಧ್ಯಪ್ರವೇಶಿಸಿ ಶಾಲಾ-ಕಾಲೇಜುಗಳಿಗೆರಜೆ ಘೋಷಿಸಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಆನ್ ಲೈನ್ ತರಗತಿಗಳನ್ನು ಪ್ರಾರಂಭಿಸಬೇಕು ಎಂದರು.