ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ: ತುರ್ತಾಗಿ ಕ್ರಮ ಕೈಗೊಳ್ಳಲು ಶಾಸಕ ಜಿ.ಟಿ.ದೇವೇಗೌಡ ಸೂಚನೆ
1 min read
ಮೈಸೂರು,ಅ.21-ನಗರದಲ್ಲಿ ನಿನ್ನೆ ಸಂಜೆ ಸುರಿದ ಧಾರಾಕಾರ ಮಳೆಯಿಂದಾಗಿ ಚಾಮುಂಡಿ ಬೆಟ್ಟದ ನಂದಿ ಮೂಲಕ ಹೋಗುವ ರಸ್ತೆಯಲ್ಲಿ ಭೂಕುಸಿತ ಉಂಟಾಗಿ ಹಾನಿಗೀಡಾಗಿರುವ ರಸ್ತೆಯನ್ನು ಕೂಡಲೇ ಅಭಿವೃದ್ಧಿ ಪಡಿಸುವಂತೆ ಶಾಸಕ ಜಿ.ಟಿ.ದೇವೇಗೌಡ ಅಧಿಕಾರಿಗಳಿಗೆ ಸೂಚಿಸಿದರು.

ಚಾಮುಂಡಿಬೆಟ್ಟದಲ್ಲಿ ಭೂಕುಸಿತ ಉಂಟಾಗಿರುವ ಸ್ಥಳಕ್ಕೆ ಇಂದು ಭೇಟಿ ನೀಡಿ ಪರಿಶೀಲಿಸಿದ ಜಿಟಿಡಿ ಅವರು, ಕೂಡಲೇ ರಸ್ತೆಯನ್ನು ಅಭಿವೃದ್ಧಿ ಪಡಿಸುವಂತೆ ಹಾಗೂ ಆರ್.ಸಿ.ಸಿ.ರಿಟೈನಿಂಗ್ ವಾಲ್ ನಿರ್ಮಾಣ ಮಾಡಲು ಕೂಡಲೇ ಅಂದಾಜು ಪಟ್ಟಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕಳೆದ ಎರಡು ವರ್ಷಗಳು ಹಿಂದೆಯು ಸಹ ಇದೆ ರೀತಿ ಭೂಕುಸಿತ ಚಾಮುಂಡಿಬೆಟ್ಟದ ರಸ್ತೆಯಲ್ಲಿ ಸಂಭವಿಸಿತ್ತು. ಆದ್ದರಿಂದ ಬೆಟ್ಟದಲ್ಲಿ ಈ ರೀತಿಯ ಭೂಕುಸಿತ ಸಂಭವಿಸದಂತೆ ಕ್ರಮ ಕೈಗೊಳ್ಳಲು ತಾಂತ್ರಿಕ ವರದಿಯನ್ನು ತಯಾರಿಸಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ರಸ್ತೆ ಅಭಿವೃದ್ಧಿಗೆ ಮತ್ತು ಆರ್.ಸಿ.ಸಿ.ರಿಟೈನಿಂಗ್ ವಾಲ್ ನಿರ್ಮಾಣ ಮಾಡಲು ಕೂಡಲೇ ಕ್ರಮ ಕೈಗೊಳ್ಳುವಂತೆ ಮಾನ್ಯ ಲೋಕೋಪಯೋಗಿ ಸಚಿವರಲ್ಲಿ, ಉಸ್ತುವಾರಿ ಸಚಿವರಲ್ಲಿ ಹಾಗೂ ಲೋಕೋಪಯೋಗಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಕೃಷ್ಣರೆಡ್ಡಿಯವರಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಹರ್ಷ, ಎ.ಇ.ಇ.ರಾಜು ಹಾಜರಿದ್ದರು.