ಅಕ್ಟೋಬರ್ 4 ರಿಂದ ಶ್ರೀರಂಗಪಟ್ಟಣ ದಸರ: ಎನ್.ಚಲುವರಾಯಸ್ವಾಮಿ
1 min read
ಮಂಡ್ಯ: ಐತಿಹಾಸಿಕ ಶ್ರೀರಂಗಪಟ್ಟಣ ದಸರಾವನ್ನು ಅಕ್ಟೋಬರ್ 4 ರಿಂದ ಮೂರು ದಿನಗಳ ಕಾಲ ಅಥವಾ 5 ದಿನಗಳ ಕಾಲ ಆಚರಿಸಲಾಗುವುದು ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಅವರು ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಪೂರ್ವಸಿದ್ಧತಾ ಸಭೆ ನಡೆಸಿ ಮಾತನಾಡಿದರು. ದಸರಾದಲ್ಲಿ ಕಾರ್ಯಕ್ರಮಗಳು ಜನಾಕರ್ಷಿತವಾಗಿರಲಿ ಹಾಗೂ ಯಾವುದೇ ಲೋಪವಿಲ್ಲದಂತೆ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ ಎಂದರು.
ವಿವಿಧ ಸಮಿತಿಗಳನ್ನು ರಚಿಸಿ ಯೋಜನೆಗಳನ್ನು ಸಿದ್ಧಪಡಿಸಿ ಉತ್ತಮವಾಗಿ ಕಾರ್ಯಕ್ರಮಗಳು ಮೂಡಿ ಬರಬೇಕು ಸ್ಥಳೀಯ ಕಲಾವಿದರಿಗೆ ಆದ್ಯತೆ ನೀಡಿ ಎಂದರು.
ಜಿಲ್ಲಾಧಿಕಾರಿ ಡಾ: ಕುಮಾರ ಅವರು ಮಾತನಾಡಿ ದಸರಾ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಡೆಸಲು ಸ್ವಾಗತ, ವೇದಿಕೆ, ಸಾಂಸ್ಕೃತಿಕ ಸೇರಿದಂತೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಕ್ರೀಡಾ, ಯೋಗ, ಮಕ್ಕಳ ದಸರಾ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.
ಸಭೆಯಲ್ಲಿ ಶಾಸಕರಾದ ರಮೇಶ್ ಬಾಬು ಬಂಡಿಸಿದ್ದೇಗೌಡ, ಹೆಚ್. ಟಿ ಮಂಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.