ಅನ್ನದಾತರ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧ: ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು,ಜ.13-ದೇಶದ ಬೆನ್ನೆಲುಬು ಅನ್ನದಾತರ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ನಗರದ ಆಳಂದ ರಸ್ತೆಯಲ್ಲಿರುವ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ರಾಯಚೂರು ಕೃಷಿ ವಿಶ್ವವಿದ್ಯಾಲಯದಿಂದ 5.45 ಕೋಟಿ ರೂ. ವೆಚ್ಚದಲ್ಲಿ ಮಹಾವಿದ್ಯಾಲಯದ ವಿಸ್ತರಣಾ ಕಟ್ಟಡ ನಿರ್ಮಾಣದ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಶಯದಂತೆ ರೈತರ ಆದಾಯ ದ್ವಿಗುಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಕಲ್ಯಾಣ ಕರ್ನಾಕದ ರೈತರ ಬಗ್ಗೆ ಸರ್ಕಾರಕ್ಕೆ ವಿಶೇಷ ಕಾಳಜಿ ಇದೆ. ವಿಧಾನಸೌಧದಲ್ಲಿ ಕೂತು ಕೆಲಸ ಮಾಡುವ ಸರ್ಕಾರ ಇದಲ್ಲ, ರೈತರ ಮನೆ ಬಾಗಿಲಿಗೆ, ಹೊಲಗಳಿಗೆ ಸರ್ಕಾರ ಹೋಗಲಿದೆ ಎಂದರು.
ಮುಂದಿನ ದಿನದಲ್ಲಿ ಕಲಬುರಗಿಗೆ ಬಂದು ಒಂದು ರೈತರೊಂದಿಗಿದ್ದು, ಅವರ ಸಂಕಷ್ಟಗಳನ್ನು ಆಲಿಸುವೆ ಎಂದು ಹೇಳಿದರು.
ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿ ಅಧಿಕಾರ ವಹಿಸಿದ ಕೂಡಲೇ ರೈತರ ಮಕ್ಕಳು ಉನ್ನತ ವ್ಯಾಸಂಗ ಮಾಡಬೇಕು ಎಂಬ ಕಾರಣದಿಂದ 2500 ರೂ. ಗಳಿಂದ 11500 ರೂ. ವರೆಗೆ ವಿದ್ಯಾರ್ಥಿ ವೇತನ ಘೋಷಿಸಿದ್ದಾರೆ. ಇದರ ಜೊತೆಗೆ ಇತ್ತೀಚೆಗೆ 8 ರಿಂದ 10ನೇ ತರಗತಿ ಓದುವ ರೈತರ ಹೆಣ್ಣು ಮಕ್ಕಳಿಗೆ ವಾರ್ಷಿಕ 3000 ರೂ. ವಿದ್ಯಾರ್ಥಿ ವೇತನವು ಜಾತಿಗೊಳಿಸಲಾಗಿದೆ. ಒಟ್ಟಾರೆಯಾಗಿ ರೈತಾಪಿ ಕುಟುಂಬವನ್ನು ಮೇಲಕ್ಕೆತ್ತುವ ಸರ್ವ ಪ್ರಯತ್ನ ನಡೆದಿದೆ ಎಂದರು.
ಕಾರ್ಯಕ್ರಮದಲ್ಲಿ ಸಂಸದ ಡಾ. ಉಮೇಶ ಜಿ. ಜಾಧವ, ಶಾಸಕರಾದ ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ, ಡಾ. ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ಎಸ್.ಪಾಟೀಲ, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ ಇತರರು ಉಪಸ್ಥಿತರಿದ್ದರು.